Kannada Paryaya
Thursday, October 17, 2024
PARYAYA: ವಾಟ್- ಸುದ್ದಿ
Wednesday, October 16, 2024
PARYAYA: ವಾಟ್- ಸುದ್ದಿ
Saturday, October 5, 2024
PARYAYA: ಮೇಘನಾ ಉಪಾಧ್ಯಾಯ ಯಕ್ಷನೃತ್ಯ
ಮೇಘನಾ ಉಪಾಧ್ಯಾಯ ಯಕ್ಷನೃತ್ಯ
ಬೆಂಗಳೂರು: ಮೇಘನಾ ಉಪಾಧ್ಯಾಯ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಉಪಸಂಪಾದಕ ಶ್ರೀ ಉಪಾಧ್ಯಾಯ ಅವರ ಪುತ್ರಿ. ಕರ್ನಾಟಕ ಮಾತ್ರವಲ್ಲ, ದೇಶದ ಹಲವಡೆಗಳಲ್ಲೂ ತಮ್ಮ ಯಕ್ಷ ನೃತ್ಯ ಪ್ರದರ್ಶನ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಪ್ರಸ್ ಕ್ಲಬ್ನಲ್ಲಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯ ಸಂದರ್ಭದಲ್ಲಿ ಅವರು ತಮ್ಮ ಯಕ್ಷನೃತ್ಯದ ಪ್ರದರ್ಶನ ನೀಡಿದರು. ಅದರ ತುಣುಕು ಒಂದು ಇಲ್ಲಿದೆ.
ವಿಡಿಯೋ ನೋಡಲು ಮೇಲಿನ ☝ ಚಿತ್ರ ಕ್ಲಿಕ್ ಮಾಡಿರಿ.
Tuesday, October 1, 2024
PARYAYA: ಎನ್ಎಲ್ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ
ಎನ್ಎಲ್ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ
ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗಾಗಿ ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿ ಪಡಿಸಿದ ʼಸಂಪೂರ್ಣ ಪಂಚಾಯತ್ ಆಪ್ತಮಿತ್ರʼ ಆಪ್ ಆಧಾರಿತ ದಿಕ್ಸೂಚಿ ಕಲಿಕಾ ತಂತ್ರಜ್ಞಾನವನ್ನು (ಎನ್ಎಲ್ಟಿ) ಬಳಸಿಕೊಳ್ಳುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಿ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು 2024 ಸೆಪ್ಟೆಂಬರ್ 30ರ ಸೋಮವಾರ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸಹಪಾಠಿಗಳಾದ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ʼಅಗ್ರಿ ಬೆಸ್ಟ್ ಕ್ಲಬ್ -75ʼ ಸದಸ್ಯರು ನೇತೃತ್ವದಲ್ಲಿ ವಿಕಾಸಸೌಧದ ಗೃಹ ಸಚಿವರ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯವಸ್ಥೆ ಅಸ್ತಿತ್ವಕ್ಕೆ ಬಂದು ಮೂವತ್ತು ವರ್ಷಗಳು ಕಳೆದಿದ್ದರೂ ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆ ಸುಧಾರಿಸಿಲ್ಲ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆ ಕುರಿತು ನೀಡಲಾಗುತ್ತಿರುವ ತರಬೇತಿ ಜೊತೆಗೆ ಆನ್ ಲೈನ್ ತರಬೇತಿಯ ಅಂಶವನ್ನು ಸೇರಿಸಲು ಸಾಧ್ಯವಿದೆ ಎಂದು ಅವರು ಹೇಳಿದರು.
ಈ ತರಬೇತಿಯಲ್ಲಿ ಇರಬೇಕಾದ ವಿಷಯಗಳಿಗೆ ಸಂಬಂಧಿಸಿದಂತೆ ತೀರ್ಮಾನಿಸಲು ಸರ್ಕಾರಿ ಅಧಿಕಾರಿಗಳು ಮತ್ತು ಸಂಪೂರ್ಣ ಸ್ವರಾಜ್ ಫೌಂಡೇಶನ್ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ತ್ವರಿತವಾಗಿ ರಚಿಸಿ ಕಾರ್ಯೋನ್ಮುಖರಾಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಗೃಹ ಸಚಿವ ಪರಮೇಶ್ವರ್ ಅವರು ಮಾತನಾಡಿ ಕನಿಷ್ಠ 4-5 ಜಿಲ್ಲೆಗಳಲ್ಲಿ ಒಂದೊಂದು ತಾಲೂಕಿನಲ್ಲಿ ಪ್ರಾಯೋಗಿಕ ಕಾರ್ಯಕ್ರಮ ಮೂಲಕ ಈ ತರಬೇತಿ ನೀಡುವ ಯತ್ನ ಆರಂಭಿಸುವಂತೆ ಸಲಹೆ ಮಾಡಿದರು.
ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಅಂಜುಮ್ ಪರ್ವೇಜ್, ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಂಪೂರ್ಣ ಸ್ವರಾಜ್ ಫೌಂಡೇಷನ್ ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಟ್ರಸ್ಟಿ ಡಾ. ಶಂಕರ ಕೆ. ಪ್ರಸಾದ್ ಅವರು ʼಸಂಪೂರ್ಣ ಪಂಚಾಯತ್ ಆಪ್ತಮಿತ್ರ ಆಪ್ʼ ಮೂಲಕ ದಿಕ್ಸೂಚಿ ಕಲಿಕಾ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗೆ ತಾವಿರುವ ಜಾಗದಲ್ಲೇ ತರಬೇತಿ ಪಡೆಯುವ ಬಗೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.
ಇವುಗಳನ್ನೂ ಓದಿರಿ:
ಮುಂದಿನ ಬಜೆಟಿಗೆ ಎನ್ಎಲ್ಟಿ: ಗೃಹ ಸಚಿವ ಪರಮೇಶ್ವರ್ ಭರವಸೆ
ಭ್ರಷ್ಟಾಚಾರ, ಮಧ್ಯವರ್ತಿ ನಿವಾರಣೆಗೆ ತಂತ್ರಜ್ಞಾನ ಪರಿಹಾರ
ಗಾಂಧಿಗಿರಿಯ ʼಗುಲಾಬಿ ಗ್ಯಾಂಗ್ʼ ಕಥೆಗೆ ಇದೀಗ ಪುಸ್ತಕ ರೂಪ
ಏನಿದೆ ಈ ಪುಸ್ತಕಗಳಲ್ಲಿ?
ಪುಸ್ತಕಗಳ ಬಿಡುಗಡೆ ಸಮಾರಂಭ
ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2
ಸಾಮರ್ಥ್ಯ ವೃದ್ಧಿಗೆ ಡಿಜಿಟಲ್ ತಂತ್ರಜ್ಞಾನ ಬಳಕೆ ಹೇಗೆ?
ಇದೀಗ ಬಿಡುಗಡೆಯಾಗಿದೆ……
Wednesday, September 18, 2024
PARYAYA: ಸಾಧನೆ / ಸಾಧಕರು
ಈ ಕೃಷಿಕ ಪದವೀಧರನ ಸಾಧನೆಗೊಂದು ಸೆಲ್ಯೂಟ್!
PARYAYA: ಗಣೇಶೋತ್ಸವ ೨೦೨೪: ಭರತನಾಟ್ಯ
ಗಣೇಶೋತ್ಸವ ೨೦೨೪: ಭರತನಾಟ್ಯ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ೨೦೨೪ ಸೆಪ್ಟೆಂಬರ್ ೧೩, ೧೪ ಮತ್ತು ೧೫ರಂದು ಗಣೇಶೋತ್ಸವ ಕಾರ್ಯಕ್ರಮ ಸಡಗರದೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೈಸೂರಿನ ವಿದುಷಿ ಶ್ರೀಮತಿ ಮಧುರಾ ಕಾರಂತ್ ಅವರು ತಮ್ಮ ಭರತನಾಟ್ಯದ ಮೂಲಕ ಪ್ರೇಕ್ಷಕರ ಮನ ಗೆದ್ದರು. ಮಧುರಾ ಅವರ ಭರತನಾಟ್ಯದ ಒಂದು ದೃಶ್ಯ ಇಲ್ಲಿದೆ:Monday, September 16, 2024
PARYAYA: ಕೊನೆಯ ಕ್ಷಣದಲ್ಲೂ ಕಾಯಕದ್ದೇ ಚಿಂತನೆ..
ಕೊನೆಯ ಕ್ಷಣದಲ್ಲೂ ಕಾಯಕದ್ದೇ ಚಿಂತನೆ..
ಸರ್. ಹದಿನೈದು ನಿಮಿಷ ಅಷ್ಟೇ ಸಾರ್. ಹದಿನೈದು ನಿಮಿಷದ ಹಿಂದೆ ನನ್ನ ಬಳಿ ಫೋನಿನಲ್ಲಿ ಮಾತನಾಡಿದ್ದರು.ಈಗಷ್ಟೇ ಊಟ ಆಯ್ತು. ಗ್ಯಾಚ್ಯುಟಿ ಕೇಸಿಗೆ ಸಂಬಂಧಪಟ್ಟ ಹಾಗೆ ಹಲವಾರು ದಾಖಲೆಗಳ ಫೈಲ್ ಸಿದ್ಧ ಪಡಿಸಿ ಇಟ್ಟಿದ್ದೇನೆ. ಮನೆಗೆ ಬಂದು ಬಿಡಿ. ಕಾಪಿ ಮಾಡಿಸಿಕೊಂಡು ಬರೋಣ. ನಾಳೆ ವಕೀಲರನ್ನು ಕಂಡು ಮಾತಾಡೋಣ ಅಂತ ಹೇಳಿದ್ದರು. ನಾನು ಬರ್ತೇನೆ ಅಂತ ಹೇಳಿದ ಬಳಿಕ ಫೋನ್ ಇಟ್ಟಿದ್ದರು.
ನಾನು ಇನ್ನಿಬ್ಬರಿಗೂ ಫೋನ್ ಮಾಡಿ ಬರಲು ಹೇಳಿ ಬಳಿಕ ಮನೆಯಿಂದ ಹೊರಟಿದ್ದೆ. ಮೇಕ್ರಿ ಸರ್ಕಲ್ ತಲುಪಿದ್ದೆ. ಮೊಬೈಲ್ ಫೋನ್ ರಿಂಗಣಿಸಿತು. ಫೋನ್ ಕೈಗೆ ತೆಗೆದುಕೊಂಡೆ. ಆ ಕಡೆಯಿಂದ ಮ್ಯಾಡಮ್ ಮಾತನಾಡಿದರು: “ನೀಲಕಂಠಪ್ಪ, ಯಜಮಾನ್ರು ಕುಸಿದು ಬಿದ್ರು. ಆಸ್ಪತ್ರೆಗೆ ಕರ್ಕೊಂಡು ಹೋಗಿದ್ದಾರೆ.”
ʼಯಾವ ಆಸ್ಪತ್ರೆ ಮೇಡಂ?ʼ
ʼಪೋರ್ಟಿಸ್ʼ.
ʼಸರಿ ಮೇಡಂ ನಾನು ಅಲ್ಲಿಗೆ ಬರ್ತೇನೆʼ.
ಮೇಕ್ರಿ ಸರ್ಕಲ್ ನಿಂದ ಸ್ವಲ್ಪ ದೂರ ಮುಂದಕ್ಕೆ ಬಂದಿದ್ದೆ. ಮತ್ತೆ ಫೋನ್ ಸದ್ದು ಮಾಡಿತು. ಕೈಗೆ ತೆಗೆದುಕೊಂಡೆ. ʼಸರ್ ಅಪ್ಪ ಹೋಗ್ಬಿಟ್ರುʼ ಮಗ ಹೇಳ್ತಾ ಇದ್ದರು.
ʼಈಗ ಎಲ್ಲಿದ್ದೀರಿ?ʼ
ʼವಾಪಸ್ ಮನೆಗೆ ಬಂದ್ವಿ. ಅಲ್ಲಿಗೇ ಬಂದು ಬಿಡಿʼ
ʼನನಗೆ ಶಾಕ್ ಆಗಿತ್ತು. ಅಷ್ಟೇ ಸಾರ್. ಹದಿನೈದು ನಿಮಿಷದ ಹಿಂದೆ ಮಾತನಾಡುವಾಗ ಚೆನ್ನಾಗಿಯೇ ಇದ್ದರು. ತುಂಬಾ ಚೆನ್ನಾಗಿ ಮಾತನಾಡಿದ್ದರು.ʼ
ʼಮತ್ತೆ ಏನಾಯಿತಂತೆ?ʼ
ʼಸರ್ ನನ್ನ ಬಳಿ ಮಾತನಾಡಿ ಫೋನ್ ಇಟ್ಟ ಬಳಿಕ ಸಣ್ಣಗೆ ಕೆಮ್ಮು ಬಂತಂತೆ.ಉಸಿರು ಎಳೆದುಕೊಳ್ಳಲು ಸ್ವಲ್ಪ ಕಷ್ಟ ಆಗ್ತಿದೆ ಅಂತ ಇನ್ಹೇಲರ್ ತೆಗೆದುಕೊಂಡು ಔಷಧ ತೆಗೆದುಕೊಳ್ಳಲು ಯತ್ನಿಸಿದರಂತೆ. ಆದರೆ ಸಾಧ್ಯವಾಗದೆ ಕುಸಿದರಂತೆ.ʼ
೨೦೨೪ ಸೆಪ್ಟೆಂಬರ್ ೧೪ರಂದು ಯಾವುದೋ ಯೋಚನೆಯಲ್ಲಿ ಇದ್ದರೇನೋ ಎಂಬಂತೆ ನಿಶ್ಚಲರಾಗಿ ಮಲಗಿದ್ದ ಅವರನ್ನು ನೋಡಿದ ಬಳಿಕ ರಾಮಾನುಜ ಎಚ್.ಎಸ್. (೦೨.೦೫.೧೮೬೦-೧೩.೦೯.೨೦೨೪) ಅವರ ಹಿಂದಿನ ದಿನ ಸಂಜೆಯ ಕೊನೆಯ ಕ್ಷಣಗಳ ಬಗ್ಗೆ ಹೇಳಿದ್ದು ನೀಲಕಂಠಪ್ಪ.
ಎಂತಹ ಕಾಯಕಜೀವಿ ರಾಮಾನುಜ ನೀವು. ಒಂದು ಸಲ ನನ್ನ ಬಳಿ ಮಾತನಾಡುವಾಗ ಹೇಳಿದ್ದಿರಿ. ಈ ಕೆಲಸ ಮಾಡಲು ತುಂಬಾ ಬದ್ಧತೆ ಬೇಕು. ಇಲ್ಲದಿದ್ದರೆ, ಅರ್ಧಕ್ಕೆ ಕೆಲಸ ನಿಂತುಹೋಗುತ್ತದೆ ಅಂತ.
ನೀವು ಮಾಡುತ್ತಿದ್ದ ಕೆಲಸ ನಿಲ್ಲಿಸಲೇ ಇಲ್ಲ. ಕೊನೆಯ ಕ್ಷಣದವರೆಗೂ. ನಿಜಕ್ಕೂ ಕಾಯಕಜೀವಿಯ ಅದ್ಭುತ ಬದ್ಧತೆಗೆ ಉದಾಹರಣೆ ನೀವು.
ಪ್ರಜಾವಾಣಿಯಲ್ಲಿ ಕೆಲಸ ಮಾಡುವಾಗಲೇ ನಿಮ್ಮನ್ನು ಗಮನಿಸಿದ್ದೆ. ನೌಕರರ ಹಿತ ಕಾಯುವ ಸಲುವಾಗಿ ಸಂಘದ ನಾಯಕರಾಗಿ ನೀವು ನಿರಂತರವಾಗಿ ಪಡುತ್ತಿದ್ದ ಶ್ರಮ ಅಷ್ಟಿಷ್ಟಲ್ಲ. ಯಾವುದೋ ಒಂದು ದಿನ ದೆಹಲಿಗೆ ಫೋನ್, ಇನ್ಯಾವುದೋ ಒಂದು ದಿನ ಚೆನ್ನೈಗೆ ಫೋನ್. ಈ ಫೋನಿನ ಬೆನ್ನಲ್ಲೇ ನಿಮಗೆ ಬೇಕಾಗಿದ್ದ ಅದ್ಯಾವುದೋ ದಾಖಲೆ ನಿಮ್ಮ ಕೈಸೇರುತ್ತಿತ್ತು.
ಕಾರ್ಮಿಕ ಕಾಯಿದೆಗಳ ಬಗೆ ನಿಮಗಿದ್ದ ಅನುಭವ ಅಪಾರ. ಎಷ್ಟೋ ಬಾರಿ ವಕೀಲರಿಗೇ ಪ್ರಕರಣವನ್ನು ಎಳೆ ಎಳೆಯಾಗಿ ವಿವರಿಸಿ, ಕೇಸ್ ಮುಂದುವರೆಸಬೇಕಾದ ದಿಕ್ಕನ್ನು ಸೂಚಿಸುತ್ತಿದ್ದಿರಿ. ಅವರಿಗೆ ವಾದಕ್ಕೆ ಬೇಕಾದ ಸಕಲ ಸಂಪನ್ಮೂಲಗಳನ್ನೂ ಒದಗಿಸಿಕೊಡುತ್ತಿದ್ದಿರಿ.
ಇಷ್ಟೆಲ್ಲ ಸಂಪನ್ಮೂಲ ಒದಗಿಸಲು ಕೈಯಿಂದಲೇ ಹಣ ವೆಚ್ಚ ಮಾಡಿಕೊಳ್ಳುತ್ತಿದ್ದಿರಿ. ನಿವೃತ್ತಿಯ ಬಳಿಕವೂ ನಿವೃತ್ತ ನೌಕರರ ಹಿತ ರಕ್ಷಣೆಗಾಗಿ ವಕೀಲರ ಜೊತೆಗೆ ಓಡಾಡುತ್ತಿದ್ದಿರಿ. ನ್ಯಾಯಾಲಯಗಳಿಗೆ ತೆರಳಿ ಸಾಕ್ಷ್ಯ ನೀಡುತ್ತಿದ್ದಿರಿ.
ವಾರದ ಹಿಂದೆ ಫೋನ್ ಮಾಡಿದ್ದಾಗ ನನ್ನ ಬಳಿ ಹೇಳಿದ್ದಿರಿ.ʼಯಾಕೋ ಆರೋಗ್ಯ ಸ್ವಲ್ಪ ಕೈಕೊಡುತ್ತಿದೆ. ಅದೂ ದೆಹಲಿಗೆ ಹೋಗಿ ಬಂದ ಬಳಿಕ. ಉಸಿರಾಟದ ಸಮಸ್ಯೆಯಾಗುತ್ತಿದೆ.ʼ. ನೀವು ದೆಹಲಿಗೆ ಹೋಗಿದ್ದದ್ದು ಕೂಡಾ ಕಾರ್ಮಿಕರಿಗೆ ಸಂಬಂಧಪಟ್ಟ ಪ್ರಕರಣದ ಸಲುವಾಗಿ.
ಇಷ್ಟೊಂದು ಬೇಗ ಹೀಗೇಕೆ ಹೊರಟು ಬಿಟ್ಟಿರಿ? ಹೊಸದಾಗಿ ಶುರು ಮಾಡಬೇಕು ಅಂದುಕೊಂಡಿದ್ದ ಹೋರಾಟದ ಬಗ್ಗೆ ದಿವಂಗತ ಸುಬ್ಬರಾವ್ ಅವರ ಬಳಿಯೋ, ದಿವಂಗತ ಶಾಂತಾರಾಮ್ ಭಟ್ ಅವರ ಬಳಿಯೋ ಸಲಹೆ ಪಡೆಯುವ ಯೋಚನೆ ಬಂತೇ?
ಪ್ರಶ್ನೆಗಳೆಲ್ಲ ಕೇವಲ ಪ್ರಶ್ನೆಗಳಾಗಿ ಉಳಿದು ಬಿಡುತ್ತವೆ.
ಬೇರೇನೂ ಹೇಳಲು ಸಾಧ್ಯವಾಗುತ್ತಿಲ್ಲ. ನಿಮ್ಮ ಹೋರಾಟದ ಕಾಯಕಕ್ಕೆ ಅಂತಿಮ ಫಲ ಇನ್ನೂ ಲಭಿಸಿಲ್ಲ. ಆದಷ್ಟು ಬೇಗ ಲಭಿಸಲಿ. ಎಲ್ಲೇ ಇದ್ದರೂ ನಿಮ್ಮ ಆತ್ಮಕ್ಕೆ ಶಾಂತಿ ಲಭಿಸುವಂತಾಗಲಿ ಮತ್ತು ನಿಮ್ಮ ಕುಟುಂಬದ ಸದಸ್ಯರೆಲ್ಲರಿಗೂ ಈ ಅಗಲಿಕೆಯ ನೋವು ಸಹಿಸುವ ಶಕ್ತಿ ಸಿಗಲಿ ಎಂಬುದಷ್ಟೇ ಪ್ರಾರ್ಥನೆ.